Fact Check | ನಿತೀಶ್ ಕುಮಾರ್‌ರವರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್‌ ಅವರ ನೇತೃತ್ವದ ಜೆಡಿಯು ಎನ್‌ಡಿಎಗೆ ಬೆಂಬಲ ನೀಡಿತ್ತು. ಅದರ ಪರಿಣಾಮವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈಗ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿ ಬರುತ್ತದೆ ಎಂದು ಅವರು ಊಹಿಸಿರಲಿಲ್ಲ. ಲಾಲು ಯಾದವ್‌ ಅವರ ಮಾತು ಈಗ ನಿಜವಾಗುತ್ತಿದೆ. ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಈ ವಿಡಿಯೋವನ್ನು ಗಮನಿಸಿದ ಹಲವರು ಕೆಲವೇ ದಿನಗಳಲ್ಲಿ ಎನ್‌ಡಿಎ ಮೈತ್ರಿ ಬೀಳಲಿದೆ ಎಂದು ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಹಲವರು ಇದೇ ವಿಡಿಯೋವನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ರೀತಿಯಾಗಿ ನಿತೀಶ್‌ ಕುಮಾರ್‌ ಅವರು ಯಾವುದಾದರು ಧರಣಿ ನಡೆಸಿದ್ದಾರೆಯೇ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆಯೇ ಎಂಬುದನ್ನು ಈ  ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ವಿಡಿಯೋ ಕುರಿತು ಪರಿಶೀಲನೆ ನಡೆಸಲು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ವೈರಲ್‌ ವಿಡಿಯೋಗೆ ಸಂಬಂಧ ಪಟ್ಟಂತೆ  ನಿತೀಶ್‌ ಕುಮಾರ್‌ ಅವರು ಇತ್ತೀಚೆಗೆ ಯಾವುದಾದರು ಪಾದಯಾತ್ರೆ ನಡಡೆಸಿದ್ದಾರೆಯೇ ಎಂದು ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಹುಡುಕಾಟವನ್ನು ನಡೆಸಲಾಯಿತು. ಒಂದು ವೇಳೆ ನಿತೀಶ್‌ ಕುಮಾರ್‌ ಅವರು ಪಾದಯಾತ್ರೆ ನಡೆಸಿದ್ದು ನಿಜವೇ ಆಗಿದ್ದರೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸುದ್ದಿ ಮಾಡಬೇಕಿತ್ತು. ಆದರೆ ಆ ರೀತಿಯ ಯಾವುದೇ ಸುದ್ದಿಗಳು ಪತ್ತೆಯಾಗಿಲ್ಲ. ಹೀಗಾಗಿ ವೈರಲ್‌ ವಿಡಿಯೋ ಹಲವು ಅನುಮಾನಗಳನ್ನು ಹುಟ್ಟಿಸಿದೆ.

ಹೀಗಾಗಿ ಹೆಚ್ಚಿನ ಮಾಹಿತಿಗಾಗಿ ವೈರಲ್‌ ವಿಡಿಯೋದ ಕೆಲವೊಂದು ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೆ ನಮಗೆ 2 ಮಾರ್ಚ್ 2014 ರಂದು ABP ಯ ಅಧಿಕೃತ YouTube ಚಾನಲ್‌ನಲ್ಲಿ ಪ್ರಕಟವಾದ ಮೂಲ ವರದಿಯೊಂದು ಕಂಡು ಬಂದಿದೆ. ಈ ವರದಿಯ ಪ್ರಕಾರ, ನಿತೀಶ್ ಕುಮಾರ್ ಅವರು ತಮ್ಮ ಮನೆಯಿಂದ ಗಾಂಧಿ ಮೈದಾನದವರೆಗೆ ಮೆರವಣಿಗೆ ನಡೆಸಿದರು. ವೀಡಿಯೋದಲ್ಲಿ ತಾನು ಬಿಹಾರದ ಹಕ್ಕುಗಳಿಗಾಗಿ (ವಿಶೇಷ ವರ್ಗದ ಸ್ಥಾನಮಾನಕ್ಕಾಗಿ) ಹೋರಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರತಿಭಟನೆಯ ಕುರಿತು ಇನ್ನಷ್ಟು ಹುಡುಕಾಟ ನಡೆಸಿದಾಗ 2 ಮಾರ್ಚ್‌ 2014ರಂದು ಇಂಡಿಯಾ ಟಿವಿ ಕೂಡ ಯುಟ್ಯೂಬ್‌ನಲ್ಲಿ ಈ ವರದಿಯ ವಿಡಿಯೋವನ್ನು ಅಪ್‌ಲೋಡ್‌ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ ನಿತೀಶ್‌ ಕುಮಾರ್‌ ಅವರು “ಕೇಂದ್ರ ಸರ್ಕಾರ (ಕಾಂಗ್ರೆಸ್‌ ಸರ್ಕಾರ) 4 ಗಂಟೆಯೊಳಗೆ ಬಿಜೆಪಿ ಒಪ್ಪಿಗೆಯೊಂದಿಗೆ ಸೀಮಾಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಬಹುದು ಎಂದು ಹೇಳುತ್ತಿದ್ದರೂ ಬಿಹಾರದಂತಹ ಹಿಂದುಳಿದ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಕಂಡು ಬಂದಿದೆ. ಇದರ ಜೊತೆಗೆ ಆ ಸಂದರ್ಭದಲ್ಲಿ ನಿತೀಶ್‌ ಕುಮಾರ್‌ ಅವರು ಪಾದಯಾತ್ರೆಯನ್ನು ನಡೆಸಿರುವ ಕುರಿತು ಈ ವರದಿಯಲ್ಲಿ ಉಲ್ಲೇಖವಾಗಿಲ್ಲ. ಬದಲಾಗಿ ಅವರು ಗಾಂಧಿ ಮೈದಾನದ ವರೆಗೆ ಮೆರವಣಿಗೆ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ನಿತೀಶ್‌ ಕುಮಾರ್‌ ಅವರು, ಕೇಂದ್ರ ಸರ್ಕಾರದ ವಿರುದ್ಧ ಇತ್ತೀಚೆಗೆ ಪಾದಯಾತ್ರೆ ನಡೆಸಿದ್ದಾರೆ ಎಂಬುದು ಸುಳ್ಳಾಗಿದೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ 2014ರದ್ದಾಗಿದೆ. ಹಾಗಾಗಿ ಸುಳ್ಳು ಸುದ್ದಿಗಳನ್ನು ನಂಬುವ ಮುನ್ನ ಎಚ್ಚರ ವಹಿಸಿ.


ಇದನ್ನೂ ಓದಿ : Fact Check: ರಾಹುಲ್ ಗಾಂಧಿ ಅಸ್ಸಾಮಿಗೆ ಭೇಟಿ ನೀಡಿದ ಹಳೆಯ ವೀಡಿಯೋವನ್ನು ಮಣಿಪುರದಲ್ಲಿ “ಗೋ ಬ್ಯಾಕ್” ಪ್ರತಿಭಟನೆ ನಡೆದಿದೆ ಎಂದು ಹಂಚಿಕೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *