Fact Check | ರಾಮಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮತ್ತು ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಫೋಟೋವೊಂದನ್ನು ಹಂಚಿಕೊಂಡು  “ತುಂಬಾ ದುಃಖದ ವಿಚಾರ ಶ್ರೀರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲದಾಸ್ ಜಿ ಅವರು ಕೊನೆ ಉಸಿರೆಳೆದಿದ್ದಾರೆ. ಓಂ ಶಾಂತಿ ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.

ಹಲವರು ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಈ ಸುದ್ದಿಯನ್ನು ಹಂಚಿಕೊಂಡು ಬೇಸರವನ್ನು ವ್ಯಕ್ತ ಪಡಿಸುತ್ತಿದ್ದಾರೆ. ವೈರಲ್‌ ವಿಡಿಯೋದಲ್ಲಿ ಫೋಟೋವೊಂದು ಕಂಡು ಬಂದಿರುವುದರಿಂದ, ಹಲವರು ಈ ಬಗ್ಗೆ ವಿವಿಧ ರೀತಿಯಾದ ಬರಹಗಳನ್ನು ಬರೆದು ಸಂತಾಪವನ್ನು ಸೂಚಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬರದಿರುವುದು ಹಲವು ಅನುಮಾನಗಳನ್ನು ಮೂಡಿಸಿತ್ತು. ಹೀಗಾಗಿ ನಾವು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಅಸಲಿ ವಿಚಾರ ಹೊರ ಬಂದಿದೆ.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಪೋಸ್ಟ್‌ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು, ಇದಕ್ಕಾಗಿ ನಾವು ಸಂಬಂಧಿತ ಕೀವರ್ಡ್‌ಗಳೊಂದಿಗೆ Google ನಲ್ಲಿ ಹುಡುಕಿದೆವು. ದೈನಿಕ್ ಜಾಗರಣ್ ಅವರ ವೆಬ್‌ಸೈಟ್‌ನಲ್ಲಿ ನಾವು ವೈರಲ್‌ ಪೋಸ್ಟ್‌ಗೆ ಸಂಬಂಧಿಸಿದಂತೆ ಸುದ್ದಿ ಕಂಡುಕೊಂಡಿದ್ದೇವೆ . ಅಕ್ಟೋಬರ್ 1, 2024 ರಂದು ಪ್ರಕಟವಾದ ಸುದ್ದಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮತ್ತು ಮಣಿರಾಮ್ ದಾಸ್ ಕಂಟೋನ್ಮೆಂಟ್ ಮಹಂತ್ ಪೂಜ್ಯ ನೃತ್ಯಗೋಪಾಲ್ ದಾಸ್ ಅವರ ನಿಧನದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಇದು ಸಂಪೂರ್ಣವಾಗಿ ಸುಳ್ಳು ಎಂದು ಉಲ್ಲೇಖಿಸಲಾಗಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ನಾವು ವೈರಲ್‌ ಫೋಟೊ ಕುರಿತು ಪರಿಶೀಲನೆ ನಡೆಸಲು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ pmindia.gov.in ವೆಬ್‌ಸೈಟ್‌ನಲ್ಲಿ ಚಿತ್ರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ನಾವು ಕಂಡುಕೊಂಡಿದ್ದೇವೆ . ಮಾರ್ಚ್ 5, 2024 ರಂದು ಪ್ರಕಟವಾದ ಸುದ್ದಿಯಲ್ಲಿ ವರದಿಯಾಗಿರುವಂತೆ, ಇದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್‌ನ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಸ್ಮರಣಾನಂದ ಜಿ ಮಹಾರಾಜ್ ಅವರ ಆರೋಗ್ಯವನ್ನು ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದ ಆಸ್ಪತ್ರೆಗೆ ಹೋದಾಗ ತೆಗೆದ ಚಿತ್ರವಾಗಿದೆ ಎಂಬ ಅಂಶ ತಿಳಿದು ಬಂದಿದೆ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ, ಮಹಂತ್ ಪೂಜ್ಯ ನೃತ್ಯಗೋಪಾಲ್ ದಾಸ್ ಅವರ ನಿಧನದ ಮಾಹಿತಿ ಸುಳ್ಳಾಗಿದೆ. ವೈರಲ್‌ ಆಗುತ್ತಿರುವ ಫೋಟೊ ಮಾರ್ಚ್ 5, 2024 ರಂದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್‌ನ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಸ್ಮರಣಾನಂದ ಜಿ ಮಹಾರಾಜ್ ಅವರ ಆರೋಗ್ಯವನ್ನು ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದ ಆಸ್ಪತ್ರೆಗೆ ಹೋದಾಗ ತೆಗೆದ ಚಿತ್ರವಾಗಿದೆ. ಹಾಗಾಗಿ ಇದೊಂದು ಸುಳ್ಳು ಸುದ್ದಿಯಾಗಿದ್ದು, ಇದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ,  ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.


ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಲಕ್ಷ್ಮಿ ಎಂಬ ಮಹಿಳೆಯ ಕೊಲೆಯನ್ನು ಸುಳ್ಳು ಲವ್ ಜಿಹಾದ್ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *